ಬೆಂಗಳೂರು: ಬೆಂಗಳೂರು ನಗರ ಹಾಗೂ ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ಸರಗಳ್ಳತನ (Chain Snatching Crime) ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೇ ಸಾಲಿನಲ್ಲಿ ಇದೀಗ ನೆಲಮಂಗಲ (Nelamangala) ಸಮೀಪದ ಹುಸ್ಕೂರು ಗ್ರಾಮದಲ್ಲಿ ನಡೆದ ಭೀಕರ ಘಟನೆಯೊಂದು ನಡೆದಿದೆ. ಸರಗಳ್ಳರು ಮಹಿಳೆಯ ಮುಖಕ್ಕೆ ಸ್ಪ್ರೇ ಸಿಂಪಡಿಸಿ, ಚಿನ್ನದ ಮಾಂಗಲ್ಯ ಸರವನ್ನು ಕಸಿದು ಪರಾರಿಯಾಗಿದ್ದು, ಇದರ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ..
ಮೃತ ಮಹಿಳೆಯನ್ನು ಜ್ಯೋತಿ (45) ಎಂದು ಗುರುತಿಸಲಾಗಿದ್ದು, ಅವರು ಹುಸ್ಕೂರು ಗ್ರಾಮದ ನಿವಾಸಿಯಾಗಿದ್ದಾರೆ. ಪ್ರತಿದಿನದಂತೆ ಜ್ಯೋತಿ ಬೆಳಿಗ್ಗೆ ಎದ್ದು ಮನೆಯ ಮುಂದೆ ಕಸ ಗುಡಿಸುವ ಕೆಲಸದಲ್ಲಿ ತೊಡಗಿದ್ದರು. ಈ ವೇಳೆ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಆಕೆಯ ಬಳಿ ನುಗ್ಗಿದ್ದಾರೆ. ಯಾವುದೇ ಮುನ್ಸೂಚನೆ ನೀಡದೇ, ಆಕೆಯ ಮುಖಕ್ಕೆ ಸ್ಪ್ರೇ ಸಿಂಪಡಿಸಿ ಕಣ್ಣು, ಉಸಿರಾಟಕ್ಕೆ ತೊಂದರೆ ಉಂಟುಮಾಡಿದ್ದಾರೆ.
ಸ್ಪ್ರೇ ದಾಳಿಯಿಂದ ಏನು ನಡೆಯುತ್ತಿದೆ ಎಂಬುದನ್ನೇ ಅರಿಯದ ಸ್ಥಿತಿಯಲ್ಲಿ ಇದ್ದ ಜ್ಯೋತಿ, ಕುತ್ತಿಗೆಯಲ್ಲಿದ್ದ ಸುಮಾರು 70 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಸಿದುಕೊಳ್ಳಲು ಕಳ್ಳರು ಮುಂದಾಗಿದ್ದಾರೆ. ಕ್ಷಣಾರ್ಧದಲ್ಲೇ ಸರವನ್ನು ಕಿತ್ತುಕೊಂಡು, ಬೈಕ್ನಲ್ಲಿ ಪರಾರಿಯಾಗಿದ್ದಾರೆ. ಸ್ಪ್ರೇ ಪರಿಣಾಮದಿಂದ ತೀವ್ರ ಅಸ್ವಸ್ಥಗೊಂಡ ಜ್ಯೋತಿ ಅಲ್ಲಿಯೇ ಕುಸಿದು ಬಿದ್ದಿದ್ದಾರೆ.
ಘಟನೆಯನ್ನು ಗಮನಿಸಿದ ಕುಟುಂಬಸ್ಥರು ಮತ್ತು ಸ್ಥಳೀಯರು ತಕ್ಷಣ ಜ್ಯೋತಿಯನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ, ಮಹಿಳೆ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಯೋತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
